LPG ಸಿಲಿಂಡರ್ಗಳ ಅಭಾವ ಕರ್ನಾಟಕದಲ್ಲಿ ಮತ್ತಷ್ಟು ಉಲ್ಬಣಿಸಿದ್ದು, ಶಾಯ ಬಿಸಿಯೂಟ, ಪಿಜಿಗಳಿಗೂ ಬಿಸಿ ತಟ್ಟಿದೆ. ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್ಗಳಲ್ಲಿ (ಪಿಜಿ) ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯಿಂದಾಗಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗೆಹರಿಯುವವರೆಗೂ ಊಟ ನೀಡದಿರಲು ನಿರ್ಧರಿಸಲಾಗಿದೆ ಎಂದು ಪಿಜಿ ಮಾಲೀಕರು ಘೋಷಿಸಿದ್ದು, ಎಲೆಕ್ಟ್ರಿಕ್ ಸ್ಟವ್ ಅಥವಾ ಸೌದೆ ಬಳಕೆಯಂತಹ ಪರ್ಯಾಯ ವ್ಯವಸ್ಥೆಗಳನ್ನು ರಾತ್ರೋರಾತ್ರಿ ಜಾರಿಗೊಳಿಸುವುದು ಸಾಧ್ಯವಿಲ್ಲ ಸಂಕಷ್ಟ ತೋಡಿಕೊಂಡಿದ್ದಾರೆ.

ಉದ್ಯೋಗ ಅರಸಿ ಬಂದವರು, ವಿದ್ಯಾಭ್ಯಾಸಕ್ಕಾಗಿ ತಮ್ಮ ಮನೆಗಳಿಂದ ದೂರ ಉಳಿದು ಪಿಜಿಗಳನ್ನು ಆಶ್ರಯಿಸಿದ್ದಾರೆ. ಅವರು ಮಾಸಿಕ ಶುಲ್ಕವನ್ನು ಪಾವತಿಸಿದ್ದರೂ, ಸದ್ಯಕ್ಕೆ ಊಟದ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಹೋಟೆಲ್ಗಳೂ ಸಹ ವಾಣಿಜ್ಯ ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿರುವುದರಿಂದ, ಹೊರಗಡೆ ಊಟ ಸಿಗುವುದು ಕಷ್ಟಕರವಾಗಿದೆ. ಗೃಹಬಳಕೆಯ ಸಿಲಿಂಡರ್ಗಳ ಪೂರೈಕೆಗೆ ಕೇಂದ್ರದಿಂದ ಸೂಚನೆಗಳು ಬಂದಿದ್ದು, ಅವುಗಳು ತಕ್ಕಮಟ್ಟಿಗೆ ಲಭ್ಯವಿವೆ. ತಿಂಗಳಿಗೆ ಒಂದು ಸಿಲಿಂಡರ್ ದೊರೆಯುತ್ತಿರುವುದು ಮನೆಗಳಲ್ಲಿರುವವರಿಗೆ ಸ್ವಲ್ಪ ಸಮಾಧಾನಕರ ಸಂಗತಿ. ಆದರೆ, ವಾಣಿಜ್ಯ ಸಿಲಿಂಡರ್ಗಳ ಅಭಾವ ಮಾತ್ರ ಹೆಚ್ಚುತ್ತಲೇ ಇದೆ.
ಇನ್ನು ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯ ಮೇಲೂ ಗಂಭೀರ ಪರಿಣಾಮ ಬೀರಿದೆ. ಮಕ್ಕಳಿಗೆ ಆಹಾರ ತಯಾರಿಸಲು ತಿಂಗಳಿಗೆ ಹಲವು ಸಿಲಿಂಡರ್ಗಳು ಬೇಕಾಗುತ್ತವೆ. ಹಳೇ ಬಾಗಲಕೋಟೆಯ 3ನೇ ನಂಬರ್ ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್ ಕೊರತೆಯಿಂದ ಅಡುಗೆ ತಯಾರಿಸಲು ಸಿಬ್ಬಂದಿಗಳಿಗೆ ಕಷ್ಟವಾಗಿದ್ದು, ಏಜೆನ್ಸಿಯವರು ಒಂದು ಸಿಲಿಂಡರ್ನಲ್ಲಿ ಅಡ್ಜಸ್ಟ್ ಮಾಡಿಕೊಳ್ಳಿ. ನಂತರ ಹೆಚ್ಚಿನ ಸಿಲಿಂಡರ್ಗಳು ಬಂದಾಗ ತಲುಪಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದು ಸಿಲಿಂಡರ್ನಲ್ಲಿ ದೊಡ್ಡ ಪ್ರಮಾಣದ ಅಡುಗೆ ತಯಾರಿಸುವುದು ಕಷ್ಟಕರ ಎಂದು ಸಿಬ್ಬಂದಿ ಹೇಳಿದ್ದು, ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲು ನಿರ್ಧರಿಸಲಾಗಿದೆ.
